ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ - kannada.info@gmail.com |.

Friday, March 28, 2014

ಅಲ್ಪಸಂಖ್ಯಾತೆ ರೇವತಿ ರಂಗಪ್ರವೇಶ



ಲೈಂಗಿಕ ಅಲ್ಪ­ಸಂಖ್ಯಾತೆ ಎ. ರೇವತಿ ತಮ್ಮದೇ ಆತ್ಮಕಥೆ ‘ಬದುಕು ಬಯಲು’ ನಾಟಕದ ಮೂಲಕ ರಂಗ­ಪ್ರವೇಶ ಮಾಡಲಿದ್ದಾರೆ.

ರೇವತಿ ಅವರ ಆತ್ಮಕಥೆ ‘ದಿ ಟ್ರೂತ್ ಎಬೌಟ್‌ ಮಿ’ ಅನ್ನು ಇಂಗ್ಲಿಷಿ­ನಲ್ಲಿ ಪೆಂಗ್ವಿನ್ ಪ್ರಕಾಶನ ಪ್ರಕಟಿಸಿತ್ತು. ಈ ಕೃತಿ­ಯನ್ನು ‘ಬದುಕು ಬಯಲು’ ಹೆಸರಿನಲ್ಲಿ ಕನ್ನಡಕ್ಕೆ ಲೇಖಕಿ ದು. ಸರಸ್ವತಿ ಅನುವಾದಿ­ಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಹೆಗ್ಗೋಡಿನ ‘ಜನಮನದಾಟ’ ತಂಡ­ದಲ್ಲಿ ಮಾರ್ಚ್‌ 5­­ರಿಂದ ರಿಹರ್ಸಲ್‌ ಆರಂಭಿಸಿ­ರುವ ರೇವತಿ, ತಮ್ಮದೇ ಆತ್ಮಕಥೆಯ ನಾಟಕ ರೂಪಕ್ಕೆ ಬಣ್ಣ ಹಚ್ಚುತ್ತಿರುವ ಕುರಿತು ‘ಪ್ರಜಾವಾಣಿ’ ಜತೆ ಮಾತನಾಡಿದ್ದಾರೆ.

* ರಂಗ ಪ್ರವೇಶದ ಆಸೆ ಮೊಳೆತದ್ದು ಹೇಗೆ?
–ಬಾಲ್ಯದಲ್ಲೇ ನನಗೆ ಅಭಿನಯದ ಬಗ್ಗೆ ಒಲವಿತ್ತು. ಶಾಲೆಯಲ್ಲಿ ನಾಟಕ­ಗಳಲ್ಲಿ ಅಭಿನಯಿಸಿದ್ದೆ. ‘ಸಂಗಮ’­ದಲ್ಲಿ­ದ್ದಾಗ ಲೈಂಗಿಕ ಅಲ್ಪಸಂಖ್ಯಾತರ ಸಮಸ್ಯೆ­ಗಳನ್ನು ಕಲೆ ಮೂಲಕ ಜನರಿಗೆ ಸುಲಭ­ವಾಗಿ ತಲುಪಿ­ಸಬಹುದು ಎಂಬುದನ್ನು ಅರಿತಿದ್ದೆ.
‘ಬದುಕುಬಯಲು’ ನಾಟಕ ನೋಡಿ­ದಾಗ, ನನ್ನ ಪಾತ್ರ­ವನ್ನು ಬೇರೆ ಯಾರೋ ಅಭಿನಯಿಸುವು­ದ­ಕ್ಕಿಂತ ನಾನೇ ಅಭಿನಯಿಸಿದರೆ ಹೇಗೆ ಅಂತ ಪ್ರಶ್ನಿಸಿ­ಕೊಂಡೆ. ಈ ವಿಚಾರವನ್ನು ನಿರ್ದೇಶಕ ನೀನಾಸಂ ಗಣೇಶ್ ಅವ ರೊಂದಿಗೆ ಹಂಚಿ­ಕೊಂಡೆ.  ಅವರು ತಮ್ಮ ತಂಡಕ್ಕೆ ನನಗೆ ಪ್ರವೇಶ ನೀಡಿದರು.

* ನಿಮ್ಮದೇ ಆತ್ಮಕಥೆಯಲ್ಲಿ ನೀವೇ ಅಭಿನಯಿಸು­ತ್ತಿರು­ವುದು ಹೇಗನ್ನಿಸುತ್ತೆ?
–ಖುಷಿ ಅನ್ನಿಸುತ್ತೆ. ‘ನೀನಾಸಂ’ಗೆ ಬರಬೇಕು ಅಂತ ತುಂಬಾ ಸಲ ಅಂದು­ಕೊಂಡಿದ್ದೆ. ಆದರೆ, ಅದು ಈ  ರೀತಿ ಈಡೇರಿದೆ. ನಾಟಕದಲ್ಲಿ ರೇವತಿ ಪಾತ್ರ­ವನ್ನು ನಾನೇ ಮಾಡುತ್ತಿರುವುದರಿಂದ ಭಾವನೆಗಳನ್ನು ಸರಾಗವಾಗಿ ಅಭಿವ್ಯಕ್ತಿಪಡಿಸಲು ಸಾಧ್ಯ­ವಾ­ಗು­ತ್ತಿದೆ.

* ಲೈಂಗಿಕ ಅಲ್ಪಸಂಖ್ಯಾತರ ಸಮಸ್ಯೆ­ಗಳ ಬಿಂಬಕ್ಕೆ ರಂಗ­­ಮಾಧ್ಯಮವನ್ನೇ ಆಯ್ಕೆ ಮಾಡಿದ್ದು ಏಕೆ?
–ಮಾತು, ಬರಹಕ್ಕಿಂತ ರಂಗ­ಭೂಮಿ ಮೂಲಕ ಸುಲಭವಾಗಿ ಜನ­ರನ್ನು ತಲು­ಪ­­ಬಹುದು. ಲೈಂಗಿಕ ಅಲ್ಪ­ಸಂಖ್ಯಾತರ ಬಗ್ಗೆ ಸಮಾಜ­ದಲ್ಲಿ ಇನ್ನೂ ಆರೋಗ್ಯ­ಕರ ಮುಕ್ತಭಾವ ಬಂದಿಲ್ಲ. ಈ ಮೊದಲು ‘ಬದುಕು­ಬಯಲು’  ನಾಟಕ ನೋಡಿದ ಅನೇಕರು ಪೂರ್ವ­ಗ್ರಹ­ ಬಿಟ್ಟು ನಮ್ಮನ್ನು ಸಾಮಾನ್ಯ­­­ರಂತೆಯೇ ನೋಡುವಂತಾ­ಗಿದೆ. ಈ ಬದಲಾವಣೆ  ಸಾಧ್ಯ­ವಾಗಿದ್ದು ನಾಟಕ­ದಿಂ ದಲೇ. ಹಾಗಾಗಿ, ರಂಗಭೂಮಿಯನ್ನೇ ಆಯ್ದು­ಕೊಂಡೆ.

* ನಾಟಕದ ಸಂದೇಶವೇನು?
–ಲೈಂಗಿಕ ಅಲ್ಪಸಂಖ್ಯಾತರೂ  ಮನುಷ್ಯರೇ. ಅವರಲ್ಲೂ ಮನಸ್ಸಿದೆ ಎನ್ನುವ ಸಂದೇಶ ಸಮಾಜಕ್ಕೆ ತಲುಪ­ಬೇಕು.

* ‘ಜನಮನದಾಟ’ ತಂಡದ ಜತೆ ನಿಮ್ಮ ಒಡನಾಟ  ಹೇಗಿದೆ?
–ತಂಡದಲ್ಲಿ ನಾನೂ ಸೇರಿದಂತೆ ಒಟ್ಟು 13 ಮಂದಿ ಇದ್ದೇವೆ. ಇಲ್ಲಿ ನನ್ನನ್ನು ಎಲ್ಲರೂ ಹೆಣ್ಣೆಂದೇ ಗುರು­ತಿಸು­ತ್ತಾರೆ. ಇತರ ಮಹಿ­ಳೆ­­ಯ­ರೊಂದಿಗೆ ಹೇಗೆ ಇರು ತ್ತಾರೋ ನನ್ನ ಜತೆಯೂ ಹಾಗೇ ಇರು­ತ್ತಾರೆ. ಇದು ನನಗೆ ಸಂತಸ ನೀಡಿದೆ ಎಂದು ಮಾತು ಮುಗಿಸಿದರು ರೇವತಿ.
‘ಬದುಕು ಬಯಲು’ ನಾಟಕ  58 ಪ್ರದರ್ಶನ ಕಂಡಿದೆ. ರೇವತಿ ಅಭಿ­ನಯದ ನಾಟಕ ಏ. 18ರಿಂದ ಪ್ರದ­ರ್ಶನವಾಗಲಿದೆ. ಜುಲೈನಲ್ಲಿ ಬೆಂಗ­ಳೂ­ರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಾಟ­ಕದ 100ನೇ ಪ್ರದರ್ಶನ ನಡೆಯಲಿದೆ.  ನಾಟಕ ಪ್ರದರ್ಶನ–ಮಾಹಿತಿಗೆ ಮೊಬೈಲ್: 99002 57750
ಏನಂತಾರೆ ನಿರ್ದೇಶಕರು?
‘ರೇವತಿ ನಮ್ಮ ತಂಡಕ್ಕೆ ಬರುತ್ತೇನೆ ಅಂದಾಗ ಆಶ್ಚರ್ಯ, ಸಂತಸ ಒಟ್ಟಿಗೇ ಆಯಿತು. ಅವರು ನಮ್ಮ ಜತೆ ಬಂದಿ­ದ್ದಾರೆ ಅನ್ನೋದಕ್ಕಿಂತ ಅವರ ಜತೆಯೇ ನಾವಿದ್ದೇವೆ ಅನ್ನೋದು ಸೂಕ್ತ.  ನಾಟ­ಕದ ರಿಹರ್ಸಲ್‌ನಲ್ಲಿ ಅವರು ಇತರ­ರಂತೆ ಅಭಿ­ನ­ಯಿಸಲು ಪ್ರಯ­ತ್ನಿ­ಸುತ್ತಿದ್ದರು.
ಆದರೆ, ನಿಮ್ಮದೇ ಪಾತ್ರ. ಹಾಗಾಗಿ, ಅಭಿನಯ ಬೇಡ. ನೀವು ಇರು­ವಂತೆಯೇ ಇದ್ದರೆ ಚೆನ್ನ ಎಂದೆ. ಅದನ್ನ­ವರು ತಿದ್ದಿ­ಕೊಂಡು ಸಹಜ­ವಾಗಿಯೇ ನಾಟಕ­ದಲ್ಲಿ ತಮ್ಮನ್ನು ತೊಡಗಿಸಿ­ಕೊಂಡಿದ್ದಾರೆ. ಕನ್ನಡ ರಂಗಭೂಮಿ­ಯಲ್ಲಿ ಲೈಂಗಿಕ ಅಲ್ಪ-­ಸಂಖ್ಯಾತೆ­ಯೊಬ್ಬರು ಪೂರ್ಣ ಪ್ರಮಾಣದ ನಾಯಕಿಯಾಗಿ ಬಹುಶಃ ಇದೇ ಮೊದಲ ಬಾರಿ ಅಭಿನ­ಯಿ­ಸು­ತ್ತಿ­ದ್ದಾರೆ ಎನ್ನುತ್ತಾರೆ  ನಿರ್ದೇಶಕ ಎಂ. ಗಣೇಶ.

- ಮಂಜು ಶ್ರೀ . ಎಂ.ಕಡಕೋಳ
  ಸೌಜನ್ಯ : ಪ್ರಜಾವಾಣಿ

No comments:

Post a Comment